Thursday, June 25

ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟ: ಕೇಂದ್ರ ಕೃಷಿ ಸಚಿವರೊಂದಿಗೆ ಹೆಚ್ಡಿಕೆ ಚರ್ಚೆ

ನವದೆಹಲಿ: ಹವಾಮಾನ ವೈಪರೀತ್ಯ ಮತ್ತು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಮಾವು ಬೆಳೆಗಾರರ ಸಮಸ್ಯೆಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಈ ಕುರಿತು ಮಾಹಿತಿ ನೀಡಿರುವ ಕುಮಾರಸ್ವಾಮಿ, “ನನ್ನ ಮನವಿಗೆ ಕೇಂದ್ರ ಕೃಷಿ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾವು ಬೆಳೆಗಾರರಿಗೆ ಅನುಕೂಲವಾಗುವಂತೆ ಶೀಘ್ರದಲ್ಲೇ ಅಗತ್ಯ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಪ್ರಸಕ್ತ ಹಂಗಾಮಿನಲ್ಲಿ ಮಾವು ಬೆಳೆಗಾರರು ಎದುರಿಸುತ್ತಿರುವ ತೀವ್ರ ಬೆಲೆ ಕುಸಿತವನ್ನು ತಡೆಯಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (MIS) ಅಡಿಯಲ್ಲಿ ನೆರವು ನೀಡಬೇಕು ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (PDPS) ಮೂಲಕ ಬೆಂಬಲ ಬೆಲೆ ಘೋಷಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ರೈತರು ಬೆಲೆ ಕುಸಿತ ಮತ್ತು ಹವಾಮಾನ ವೈಪರೀತ್ಯದಿಂದ ಎದುರಿಸುವ ಸಂಕಷ್ಟಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರೈತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಹವಾಮಾನ ವೈಪರೀತ್ಯ ಹಾಗೂ ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕರ್ನಾಟಕದ ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾದ ಗೌರವಾನ್ವಿತ ಶ್ರೀ @ChouhanShivraj ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಾಯಿತು.

ನನ್ನ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಕೃಷಿ ಸಚಿವರು,… pic.twitter.com/HqW17AAMGN

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 24, 2026