
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ತಮಿಳುನಾಡಿಗೆ ಪ್ರತಿದಿನ ಸುಮಾರು 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಕುರಿತು ಸುಪ್ರೀಂ ಕೋರ್ಟ್ ಮೊರೆ ಹೋಗುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿದಿನ ಸುಮಾರು 1 ಟಿಎಂಸಿ ನೀರು ಬಿಡುವಂತೆ CWRC ಆದೇಶಿಸಿದೆ. ಕಳೆದ ತಿಂಗಳು ತಮಿಳುನಾಡಿಗೆ 3,500 ಕ್ಯುಸೆಕ್ ನೀರು ಹರಿಸುವಂತೆ ಸೂಚಿಸಿದ ಸಂದರ್ಭದಲ್ಲೇ ರಾಜ್ಯಕ್ಕೆ ನೀರು ಬಿಡುವುದು ಕಷ್ಟವಾಗಿತ್ತು ಎಂದು ಹೇಳಿದರು.
ಅದೇ ಸಂದರ್ಭದಲ್ಲಿ ಉತ್ತಮ ಮಳೆಯಾದ ಕಾರಣ ಕಬಿನಿ ಜಲಾಶಯದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಹೋಗಿತ್ತು. ಇಂದು ಕಬಿನಿಯಿಂದ ಎಷ್ಟು ಪ್ರಮಾಣದ ನೀರು ಹೊರಹೋಗಿದೆ ಎಂಬುದರ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ತಿಳಿಸಿದರು.

ಮಳೆ ಮುಂದುವರಿದರೆ ಅಥವಾ ಜಲಾಶಯಗಳಿಗೆ ಒಳಹರಿವು ಹೆಚ್ಚಾದರೆ ಯಾವುದೇ ಸಮಸ್ಯೆ ಇರುವುದಿಲ್ಲ. ಆದರೆ ಮಳೆ ಕಡಿಮೆಯಾದರೆ ತಮಿಳುನಾಡಿಗೆ ನೀರು ಬಿಡುವುದು ಕಷ್ಟವಾಗಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
CWMA ಕೂಡ CWRC ಶಿಫಾರಸಿನ ರೀತಿಯಲ್ಲೇ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ಗೆ ತೆರಳುವ ಬಗ್ಗೆ ಸರ್ಕಾರ ಆಲೋಚನೆ ನಡೆಸಿದೆ ಎಂದರು.
ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರ ಸಭೆ ಇಂದು ನಡೆಯಲಿದ್ದು, ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ತಕ್ಷಣವೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಜಲ ಸಂಪನ್ಮೂಲ ಇಲಾಖೆ ಹಾಗೂ ಸರ್ಕಾರದ ಕಾನೂನು ತಂಡದೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
