Sunday, July 19

ಜಮ್ಮು-ಕಾಶ್ಮೀರದಲ್ಲಿ ಹಠಾತ್ ಪ್ರವಾಹ; 10 ಮಂದಿ ಸಾವು, ಹಲವರು ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಪೂಂಚ್ ಜಿಲ್ಲೆಯ ಸುರಂಕೋಟ್ ತಹಸಿಲ್‌ನ ಬುಫ್ಲಿಯಾಜ್‌ನ ಲೋವರ್ ಮುರ್ರಾ ಪ್ರದೇಶದಲ್ಲಿ ಪ್ರವಾಹದ ಹೊಡೆತಕ್ಕೆ ಸಿಲುಕಿದ ಹಲವು ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಮೃತರಲ್ಲಿ ಎಂಟು ಮಂದಿಯನ್ನು ಗುರುತಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ಪ್ರವಾಹದಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಉರುಳಿಬಿದ್ದಿದ್ದು, ಮೊಬೈಲ್ ನೆಟ್‌ವರ್ಕ್ ಸೇವೆ ಅಸ್ತವ್ಯಸ್ತಗೊಂಡಿದೆ. ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ, ನಾಗರಿಕ ಆಡಳಿತ ಹಾಗೂ ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೊಘಲ್ ರಸ್ತೆ ಹಾಗೂ ರಾಜೌರಿ–ಪೂಂಚ್ ಹೆದ್ದಾರಿ ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಹಾಗೂ ಸಂತ್ರಸ್ತರಿಗೆ ತಕ್ಷಣ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ನಡುವೆ, ಜುಲೈ 23ರವರೆಗೆ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕಟ್ಟೆಚ್ಚರ ಅಧಿಕಾರಿಗಳು ತಿಳಿಸಿದ್ದಾರೆ.