Thursday, July 2

ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ತಮ್ಮದಲ್ಲ ಎಂದು ಡಿ.ವಿ. ಸದಾನಂದಗೌಡ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು.

“ವೈರಲ್ ಆಗಿರುವ ಆಡಿಯೋ ಅಸಲಿಯೇ ಅಥವಾ ನಕಲಿಯೇ ಎಂಬುದು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಈ ಬಗ್ಗೆ ಸದಾನಂದಗೌಡ ಅವರೇ ಅದು ತಮ್ಮ ಧ್ವನಿಯಲ್ಲ ಎಂದು ಹೇಳಿದ್ದಾರೆ” ಎಂದು ವಿಜಯೇಂದ್ರ ತಿಳಿಸಿದರು.

ಪಕ್ಷದ ಹಿರಿಯ ನಾಯಕರ ಹೆಸರಿನೊಂದಿಗೆ ಸಂಬಂಧಿಸಿದ ಇಂತಹ ಸೂಕ್ಷ್ಮ ವಿಷಯದಲ್ಲಿ ಯಾವುದೇ ತನಿಖೆ ಅಥವಾ ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಅವರು ಹೇಳಿದರು.

ಇದೇ ವೇಳೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಕುರಿತು ಪಕ್ಷದಲ್ಲಿ ಉಂಟಾಗಿದ್ದ ವಿವಾದಕ್ಕೆ ಈಗ ತೆರೆಬಿದ್ದಿದೆ ಎಂದು ವಿಜಯೇಂದ್ರ ತಿಳಿಸಿದರು.