Tuesday, June 9

ರಸ್ತೆ ಹೊಂಡಗಳಿಂದ ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಯು.ಟಿ. ಖಾದರ್ ಎಚ್ಚರಿಕೆ

ಮಂಗಳೂರು: ಮಳೆಗಾಲದಲ್ಲಿ ರಸ್ತೆ ಹೊಂಡಗಳಿಂದ ಅಪಘಾತಗಳು ಸಂಭವಿಸಿ ಪ್ರಾಣಹಾನಿಯಾದರೆ ಸಂಬಂಧಿತ ಇಲಾಖೆಯ ಇಂಜಿನಿಯರ್‌ಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವ ಯು.ಟಿ. ಖಾದರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ದುರಸ್ತಿ ಕಾಮಗಾರಿಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೇವಲ ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕೆಲಸ ಮಾಡದೆ, ರಸ್ತೆಗಳ ಶಾಶ್ವತ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಹಿತಾಸಕ್ತಿ ಮತ್ತು ತುರ್ತು ಸಂದರ್ಭಗಳಲ್ಲಿ ಅಧಿಕಾರಿಗಳು ತಮ್ಮ ವ್ಯಾಪ್ತಿಯನ್ನು ಮೀರಿ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದರು.

ಮಳೆಗಾಲದಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪಗಳನ್ನು ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಸಚಿವರು, ವಿದ್ಯುತ್ ಕಂಬಗಳು ಮತ್ತು ತಂತಿಗಳು ಮುರಿದು ಬೀಳುವ ಘಟನೆಗಳನ್ನು ತಡೆಯಲು ಮೆಸ್ಕಾಂ ವಿಶೇಷ ಗಮನಹರಿಸಬೇಕು ಎಂದು ಹೇಳಿದರು.

ವಿದ್ಯುತ್ ಸಂಪರ್ಕ ಕಡಿತಗೊಂಡರೆ ತ್ವರಿತ ಮರುಸ್ಥಾಪನೆಗಾಗಿ ಹೆಚ್ಚುವರಿ ಲೈನ್‌ಮನ್‌ಗಳು ಮತ್ತು ತುರ್ತು ವಾಹನಗಳನ್ನು ನಿಯೋಜಿಸಲು ಸೂಚನೆ ನೀಡಿದರು. ನೆರೆ ಅಥವಾ ಮರಗಳು ಬಿದ್ದ ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡರೆ ಸ್ಥಳೀಯ ಸಂಸ್ಥೆಗಳು ಕೂಡಲೇ ತೆರವು ಕಾರ್ಯಾಚರಣೆ ನಡೆಸಬೇಕು ಎಂದರು.

ವಿಪತ್ತು ನಿರ್ವಹಣೆಯನ್ನು ತಳಮಟ್ಟದಲ್ಲಿ ಬಲಪಡಿಸಲು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗೂ ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸುವಂತೆ ನಿರ್ದೇಶನ ನೀಡಿದ ಅವರು, ಪರಿಹಾರ ಕಾರ್ಯಗಳಲ್ಲಿ ಸ್ಥಳೀಯ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಕಡ್ಡಾಯ ಎಂದು ಹೇಳಿದರು. ಮಳೆಗಾಲದ ಸವಾಲುಗಳನ್ನು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಬೇಕು ಎಂದು ಖಾದರ್ ಸೂಚಿಸಿದರು.