
ಬೆಂಗಳೂರು: ಹಲವು ಸುತ್ತಿನ ಸಭೆಗಳ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪಟ್ಟಿಯನ್ನು ಸಿದ್ಧಪಡಿಸಿರುವ ಸಿಎಂ, ಅಧಿಕೃತ ಅನುಮೋದನೆಗಾಗಿ ರಾಜಭವನಕ್ಕೆ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿದ 19 ಸಚಿವರ ಪೈಕಿ 13 ಮಂದಿಗೆ ಮಾತ್ರ ಸದ್ಯ ಖಾತೆ ಹಂಚಿಕೆ ಮಾಡಲಾಗಿದೆ. ಉಳಿದ ಆರು ಸಚಿವರಿಗೆ ಖಾತೆ ಹಂಚಿಕೆ ಇನ್ನೂ ಬಾಕಿ ಉಳಿದಿದೆ.
ನೂತನ ಖಾತೆ ಹಂಚಿಕೆಯ ಪ್ರಕಾರ, ಎನ್. ಚಲುವರಾಯಸ್ವಾಮಿ ಅವರಿಗೆ ಕೃಷಿ ಇಲಾಖೆ, ರಿಜ್ವಾನ್ ಅರ್ಷದ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಕೆ.ಎಚ್. ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಸಂತೋಷ್ ಲಾಡ್ ಅವರಿಗೆ ಕಾರ್ಮಿಕ ಇಲಾಖೆ, ಬಸಂತಪ್ಪ ಅವರಿಗೆ ಮೀನುಗಾರಿಕೆ ಇಲಾಖೆ ಹಾಗೂ ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಹಿಸಲಾಗಿದೆ.

ಶರಣಬಸಪ್ಪ ದರ್ಶನಾಪುರ ಅವರಿಗೆ ಉನ್ನತ ಶಿಕ್ಷಣ, ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ವಸತಿ ಇಲಾಖೆ, ಲಕ್ಷ್ಮಣ ಸವದಿ ಅವರಿಗೆ ಸಹಕಾರ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಅಜಯ್ ಸಿಂಗ್ ಅವರಿಗೆ ಅರಣ್ಯ ಇಲಾಖೆ, ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ಗಣಿ ಮತ್ತು ವಿಜ್ಞಾನ ಇಲಾಖೆ ಹಾಗೂ ಬಾಲಕೃಷ್ಣ ಅವರಿಗೆ ಸಣ್ಣ ನೀರಾವರಿ ಇಲಾಖೆ ಹಂಚಿಕೆ ಮಾಡಲಾಗಿದೆ.
ಉಳಿದ ಆರು ಸಚಿವರಿಗೆ ಯಾವ ಖಾತೆಗಳನ್ನು ನೀಡಬೇಕು ಎಂಬ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ. ಖಾತೆ ಹಂಚಿಕೆ ಕುರಿತಂತೆ ಹಲವು ಸುತ್ತಿನ ಚರ್ಚೆ ನಡೆದಿದ್ದು, ರಾಜಭವನದ ಅನುಮೋದನೆ ಬಳಿಕ ಅಧಿಕೃತವಾಗಿ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.
