
ದೋಹಾ (ಕತಾರ್): ಕತಾರ್ನಲ್ಲಿರುವ ಭಾರತೀಯ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಹಾಗೂ ಭಾರತದ ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತಾರವಾಗಿ ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ) ನೂತನ ವ್ಯವಸ್ಥಾಪನಾ ಸಮಿತಿಯು ಭಾರತೀಯ ರಾಯಭಾರ ಕಚೇರಿಯ ಉಪ ರಾಯಭಾರಿ (Deputy Chief of Mission) ಸಂದೀಪ್ ಕುಮಾರ್ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿತು.
ಸಂಘದ ಅಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ, 2026–28ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಪರಿಚಯಿಸಲಾಯಿತು. ಜೊತೆಗೆ, ಮುಂದಿನ ಎರಡು ವರ್ಷಗಳಲ್ಲಿ ಹಮ್ಮಿಕೊಳ್ಳಲಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಮುದಾಯ ಸೇವಾ ಕಾರ್ಯಕ್ರಮಗಳ ರೂಪುರೇಷೆಯನ್ನು ಉಪ ರಾಯಭಾರಿಗಳ ಮುಂದೆ ಮಂಡಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಂದೀಪ್ ಕುಮಾರ್, ಕತಾರ್ನಲ್ಲಿರುವ ಭಾರತೀಯ ಸಮುದಾಯದ ಚಟುವಟಿಕೆಗಳನ್ನು ಶ್ಲಾಘಿಸಿ, ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರನ್ನು ಒಳಗೊಂಡ ಒಗ್ಗಟ್ಟಿನ ಕಾರ್ಯಪದ್ಧತಿ ಅಗತ್ಯವೆಂದು ಹೇಳಿದರು. ದೊಡ್ಡ ಪ್ರಮಾಣದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಎಲ್ಲ ಸಂಘಟನೆಗಳ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.
ರಾಯಭಾರ ಕಚೇರಿಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಭಾರತೀಯ, ಪ್ರಾದೇಶಿಕ ಹಾಗೂ ಸಾಮಾಜಿಕ-ಸಾಂಸ್ಕೃತಿಕ ಸಂಘಟನೆಗಳೊಂದಿಗೆ ನಿಕಟ ಸಮನ್ವಯ ಸಾಧಿಸಿ ಜಂಟಿಯಾಗಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಸೂಚಿಸಿದರು. ಎಲ್ಲಾ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯದ ಮೂಲಕವೇ ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಕತಾರ್ನಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಪರಿಚಯಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಉಪ ರಾಯಭಾರಿಗಳ ಸಲಹೆಗಳನ್ನು ಸ್ವಾಗತಿಸಿದ ಕರ್ನಾಟಕ ಸಂಘದ ಪದಾಧಿಕಾರಿಗಳು, ಮುಂದಿನ ದಿನಗಳಲ್ಲಿ ಸಹಭಾಗಿತ್ವದ ಹಾಗೂ ಎಲ್ಲರನ್ನು ಒಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಭರವಸೆ ನೀಡಿದರು.
ಭೇಟಿಯ ಅಂತ್ಯದಲ್ಲಿ ಉಪ ರಾಯಭಾರಿ ಸಂದೀಪ್ ಕುಮಾರ್ ಅವರಿಗೆ ಸಾಂಪ್ರದಾಯಿಕ ಶಲ್ಯ ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
