Friday, August 21

ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

ನವದೆಹಲಿ: ದೇಶದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ದೀರ್ಘಾವಧಿಯ ಯೋಜನೆಗಳನ್ನು ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ನವದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ನಡೆದ ಮೂರನೇ ಉನ್ನತ ಮಟ್ಟದ ಸಭೆಯಲ್ಲಿ ವಿವಿಧ ಸಚಿವಾಲಯಗಳ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ, ವಿದೇಶಾಂಗ ವ್ಯವಹಾರ ಹಾಗೂ ಆಡಳಿತ ಕ್ಷೇತ್ರಗಳ ಆದ್ಯತೆಗಳ ಬಗ್ಗೆ ಅಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ತಕ್ಷಣದ ಸಮಸ್ಯೆಗಳು ಮತ್ತು ಅಂಕಿ-ಅಂಶಗಳ ಮೇಲೆ ಮಾತ್ರ ಗಮನಹರಿಸದೆ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ದೀರ್ಘಾವಧಿಯ ದೃಷ್ಟಿಕೋನ ಹೊಂದಬೇಕು ಎಂದು ಮೋದಿ ಸೂಚಿಸಿದರು.

ವಿವಿಧ ಇಲಾಖೆಗಳು ಪ್ರತ್ಯೇಕವಾಗಿ ಕಾರ್ಯನಿರ್ವಹಿಸುವ ‘ಸೈಲೋ’ ಮನೋಭಾವದಿಂದ ಹೊರಬರಬೇಕು. ಇದು ಕೇವಲ ಆಡಳಿತಾತ್ಮಕ ಸಮಸ್ಯೆಯಲ್ಲ, ಮನೋಭಾವದ ಸಮಸ್ಯೆಯೂ ಆಗಿದೆ ಎಂದು ಪ್ರಧಾನಿ ಹೇಳಿದರು. ಕೋವಿಡ್ ಸಾಂಕ್ರಾಮಿಕ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ ಮಾದರಿಯನ್ನು ಸರ್ಕಾರದ ಸಹಜ ಕಾರ್ಯಸಂಸ್ಕೃತಿಯನ್ನಾಗಿ ರೂಪಿಸಬೇಕು ಎಂದರು.

ದತ್ತಾಂಶ ದೇಶದ ಪ್ರಮುಖ ರಾಷ್ಟ್ರೀಯ ಆಸ್ತಿ ಎಂದು ಬಣ್ಣಿಸಿದ ಮೋದಿ, ವಿವಿಧ ಇಲಾಖೆಗಳ ಡೇಟಾ ವ್ಯವಸ್ಥೆಗಳಲ್ಲಿ ಹೆಚ್ಚಿನ ಹೊಂದಾಣಿಕೆ ತರಬೇಕು. ದತ್ತಾಂಶವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸಾರ್ವಜನಿಕ ಸೇವೆಗಳನ್ನು ಮತ್ತಷ್ಟು ಸುಧಾರಿಸಬೇಕು ಎಂದು ಹೇಳಿದರು.

ಕೃತಕ ಬುದ್ಧಿಮತ್ತೆ (AI) ಬಳಕೆಯನ್ನು ಹೆಚ್ಚಿಸುವಂತೆ ಸೂಚಿಸಿದ ಅವರು, ತಂತ್ರಜ್ಞಾನದ ಜೊತೆಗೆ ಮಾನವ ಅನುಭವ ಮತ್ತು ವಿವೇಚನೆಗೂ ಆದ್ಯತೆ ನೀಡಬೇಕು ಎಂದರು.

ನೀತಿ ರೂಪಿಸುವಾಗ ಹೊಸ ಆಲೋಚನೆಗಳಿಗೆ ಅವಕಾಶ ಕಲ್ಪಿಸಲು ಸರ್ಕಾರದ ಇಲಾಖೆಗಳು ವಿಶ್ವವಿದ್ಯಾಲಯಗಳು ಮತ್ತು ಯುವಜನರೊಂದಿಗೆ ಹೆಚ್ಚಿನ ಸಂಪರ್ಕ ಹೊಂದಬೇಕು ಎಂದು ಪ್ರಧಾನಿ ಸಲಹೆ ನೀಡಿದರು.

Chaired a high-level meeting with Secretaries to the Government of India and discussed the future action agenda of Ministries and Departments pertaining to Infrastructure and Connectivity, Security and External Affairs and other aspects of Governance.

Emphasised the need for…

— Narendra Modi (@narendramodi) August 20, 2026

ರಕ್ಷಣಾ ಉದ್ಯಮವನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚು ಸ್ಪರ್ಧಾತ್ಮಕಗೊಳಿಸಲು ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಬೇಕು. ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಾದ ಮಾನವ ಸಂಪನ್ಮೂಲ ರೂಪಿಸಲು ಹೊಸ ತರಬೇತಿ ಮತ್ತು ಕೋರ್ಸ್‌ಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದರು.

ಭಾರತದ ಸಮುದ್ರ ವಲಯದ ಅಭಿವೃದ್ಧಿಗೂ ಆದ್ಯತೆ ನೀಡಿದ ಮೋದಿ, ಬಂದರುಗಳ ಅಭಿವೃದ್ಧಿಯಿಂದ ಬಂದರು ಆಧಾರಿತ ಸಮಗ್ರ ಅಭಿವೃದ್ಧಿಯತ್ತ ಸಾಗಬೇಕು ಎಂದು ಹೇಳಿದರು. ಉತ್ಪಾದನಾ ಹಾಗೂ ರಫ್ತು ಘಟಕಗಳಿಗೆ ಉತ್ತಮ ಸಂಪರ್ಕ ಕಲ್ಪಿಸುವ ಮೂಲಕ ದೇಶದ ಆರ್ಥಿಕ ಸಾಮರ್ಥ್ಯ ಹೆಚ್ಚಿಸಬೇಕು ಎಂದರು.

ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿಗಳೊಂದಿಗೆ ಮುಕ್ತವಾಗಿ ಬೆರೆತು ತಂಡಭಾವನೆ ಬೆಳೆಸಬೇಕು. ಒಗ್ಗಟ್ಟಿನ ಜವಾಬ್ದಾರಿತನ, ಉತ್ತಮ ಸಮನ್ವಯ ಮತ್ತು ನವೀನ ಚಿಂತನೆಯ ಮೂಲಕ ಭವಿಷ್ಯದ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ಮೋದಿ ಕರೆ ನೀಡಿದರು.