Friday, August 28

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ; ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಧಾರವಾಡ : ಕಳೆದ ಆರು ವರ್ಷಗಳಿಂದ ಸ್ವಜಿಲ್ಲೆ ಧಾರವಾಡದಿಂದ ದೂರವಿದ್ದ ಶಾಸಕ ವಿನಯ್ ಕುಲಕರ್ಣಿ ಅವರು ನ್ಯಾಯಾಲಯದ ಅನುಮತಿ ಬಳಿಕ ಮಂಗಳವಾರ ಧಾರವಾಡಕ್ಕೆ ಆಗಮಿಸಿದರು.

ಪತ್ನಿ ಹಾಗೂ ಮಕ್ಕಳೊಂದಿಗೆ ಶಿವಗಿರಿ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಬೆಂಬಲಿಗರು ಅದ್ಧೂರಿಯಾಗಿ ಸ್ವಾಗತಿಸಿದರು. ಆರತಿ ಬೆಳಗಿ, ಮನೆ ಮುಂದೆ ಕುಂಬಳಕಾಯಿ ಒಡೆದು ಸಂಭ್ರಮಿಸಿದರು. ನೂರಾರು ವಾಹನಗಳಲ್ಲಿ ಆಗಮಿಸಿದ ಬೆಂಬಲಿಗರು ತಮ್ಮ ನಾಯಕನನ್ನು ಬರಮಾಡಿಕೊಂಡರು.

ಧಾರವಾಡಕ್ಕೆ ಆಗಮಿಸುವ ಮಾರ್ಗದಲ್ಲಿ ಮಕ್ಕಳಾದ ಹೇಮಂತ್ ಹಾಗೂ ವೈಶಾಲಿ ಅವರೊಂದಿಗೆ ಹಾರೋಬೆಳವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಮುರುಘಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು.

2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು. ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬಳಿಕ 2020ರ ನವೆಂಬರ್ 5ರಂದು ಅವರನ್ನು ಬಂಧಿಸಿತ್ತು.

ಸುಮಾರು ಒಂಬತ್ತು ತಿಂಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ಅವರಿಗೆ ಬಳಿಕ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತಿನ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು.

ಇತ್ತೀಚೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಹಾಗೂ 42ನೇ ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರು ವರ್ಷಗಳ ಬಳಿಕ ವಿನಯ್ ಕುಲಕರ್ಣಿ ಅವರು ತಮ್ಮ ಸ್ವಕ್ಷೇತ್ರ ಹಾಗೂ ಸ್ವಜಿಲ್ಲೆಗೆ ಮರಳಿದ್ದಾರೆ.