Wednesday, June 25

ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಇದೀಗ ಸಿದ್ದರಾಮಯ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ‘ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ರಾಜ್ಯ ಮಟ್ಟದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಘೋಷಿಸಿದೆ.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 15,000 ಗೌರವಧನ ನೀಡಬೇಕು ಎಂಬ ಬಹುದಿನಗಳ ಬೇಡಿಕೆಯೂ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರು ಹಗಲಿರುಳು ಗ್ರಾಮಾಂತರದ ಮತ್ತು ನಗರದ ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರೂ ಶ್ಲಾಘಿಸಿದ್ದಾರೆ. ಈ ಅಸಹಾಯಕ ಬಡ ಮಹಿಳೆಯರು, ವಿಧವೆಯರು, ವಿಚ್ಛೇದಿತರನ್ನು ‘ಆಶಾ’ ಗಳನ್ನಾಗಿ ನೇಮಕ ಮಾಡಿಕೊಂಡು ಅವರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲಾಗುತ್ತದೆ ಎಂಬುದು ಸರ್ಕಾರದ ಘೋಷಣೆ. ಆದರೆ ಆಶಾಗಳ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತಿಲ್ಲವೆಂಬುದು ವಾಸ್ತವ. ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್ಸೆನ್ ದಾಖಲು ಮಾಡಬೇಕಿದ್ದು, ಆಶಾಗಳು ಮಾಡಿದ ಕೆಲಸಗಳು ದಾಖಲಾಗದೆ ಕಳೆದ 8 ವರ್ಷಗಳಿಂದ ಮಾಡಿದ ಕೆಲಸಕ್ಕೆ ಪ್ರೋತ್ಸಾಹಧನ ಸಿಗುತ್ತಿಲ್ಲ. ಹಲವಾರು ಸಮಸ್ಯೆಯಿಂದ ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಒಟ್ಟಾರೆ ಕೋಟ್ಯಂತರ ರೂ.ಗಳಷ್ಟು ನಷ್ಟವಾಗಿದೆ, ದೊಡ್ಡ ಅನ್ಯಾಯ ಆಗುತ್ತಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಹಾಗೂ ರಾಜ್ಯ ಸರ್ಕಾರದ ಗೌರವಧನದ ಜೊತೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ರೂ. 3000 ಗೌರವಧನ ಹೆಚ್ಚಿಸುವುದಾಗಿ ನೀಡಿದ್ದ ಭರವಸೆ ಎಲ್ಲಾ ಒಟ್ಟುಗೂಡಿಸಿ ಮಾಸಿಕ ರೂ. 15,000 ಗೌರವಧನ ನಿಗದಿ ಮಾಡಬೇಕು ಮತ್ತು ಇತರ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, 2024 ರ ಫೆಬ್ರವರಿ 13- 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅನಿರ್ದಿಷ್ಟ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹೋರಾಟದ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು “ನನ್ನನ್ನು ನಂಬಿ, ಹೋರಾಟ ಹಿಂತೆಗೆದುಕೊಳ್ಳಿ. ಮುಂದಿನ ಕೆಲವೇ ದಿನಗಳಲ್ಲಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿರುತ್ತಾರೆ”. ಅದೇ ರೀತಿ ಮಾನ್ಯ ಗಳೂ “ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಭರವಸೆಗಳನ್ನು ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳ ಕಾರ್ಯದರ್ಶಿ ಜೊತೆ 2 ಬಾರಿ ಸಭೆ, ಆರೋಗ್ಯ ಸಚಿವರು ಹಾಗೂ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಕಳೆದ 11 ತಿಂಗಳಲ್ಲಿ 15 ಕ್ಕೂ ಹೆಚ್ಚು ಬಾರಿ ಸಭೆಗಳು ನಡೆದಿವೆ. ಆದರೆ ಯಾವೊಂದೂ ಸಮಸ್ಯೆಗೂ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ಮತ್ತು ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದಿರುವ ನಾಗಲಕ್ಷ್ಮೀ, ಬೆಳಗಾವಿ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಹಲವಾರು ಸಚಿವರು, ನೂರಾರು ಶಾಸಕರಿಗೆ ಮನವಿ ನೀಡಲಾಗಿತ್ತು. ಅಲ್ಲಿಯೂ ಏನೂ ಇತ್ಯರ್ಥವಾಗದ ಕಾರಣ ಆಶಾ ಕಾರ್ಯಕರ್ತೆಯರು ಈಗ ಅನಿವಾರ್ಯವಾಗಿ ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಜನವರಿ 7 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಯಲಿದೆ. ಆಶಾ ಕಾರ್ಯಕರ್ತೆಯರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಎಐಯುಟಿಯುಸಿ ಕೇಂದ್ರ ಕಾರ್ಮಿಕ ಸಂಘಟನೆಗೆ ಸಂಯೋಜಿತವಾದ “ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ”ದಿಂದ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ ಎಂದವರು ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಪ್ರಮುಖ ಹಕ್ಕೊತ್ತಾಯಗಳು:

  • ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು ರೂ. 15,000 ಮಾಸಿಕ ಗೌರವಧನ ನಿಗದಿಯಾಗಬೇಕು.

  • ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2,000ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.

  • ಆಶಾ ಕಾರ್ಯಕರ್ತೆಯರು ಸ್ಮಾರ್ಟ್ ಫೋನ್ ಬಳಕೆ ಬಗ್ಗೆ ದಿ: 28-11-2024 ರಂದು ಹೊರಡಿಸಿದ ಅಧಿಕೃತ ಜ್ಞಾಪನಾ ಪತ್ರ (ಎಸ್.ಎನ್.ಓ (ಆಶಾ)/41/2023-24 ವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಅಧಿಕೃತವಾಗಿ ಆಶಾಗಳದಲ್ಲದ ಕೆಲಸವನ್ನು ಮಾಡಲು ಹೇಳಿರುವ ಆದೇಶ ವಾಪಾಸಾಗಲೇಬೇಕು.

  • ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.

  • ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.5 ಲಕ್ಷಕ್ಕೆ ಹೆಚ್ಚಿಸುವುದು.

  • ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.

  • ಪ್ರತೀ ವರ್ಷ ಪ್ರತೀ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು.

  • ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್‌ಐ ಸೌಲಭ್ಯ ನೀಡಬೇಕು.