
ಮಂಗಳೂರು ದಸರಾ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ವಿದ್ಯುತ್ ತಾಂತ್ರಿಕ ಸವಾಲಿಗೆ ಶಾಶ್ವತ ಪರಿಹಾರ; ಸ್ಪೀಕರ್’ಗೆ ಪದ್ಮರಾಜ್ ಅಭಿನಂದನೆ
ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ವಿದ್ಯುತ್ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ ಅಡಚಣೆಯುಂಟುಮಾಡುತ್ತಿದ್ದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ ರೂ. 67 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಗೆ ರಾಜ್ಯ ಸರ್ಕಾರವು ಮಂಜೂರಾತಿ ನೀಡಿದೆ.ಪ್ರತಿ ವರ್ಷ ಮಂಗಳೂರು ದಸರಾ ಮೆರವಣಿಗೆಯ ಸಂದರ್ಭದಲ್ಲಿ ಸಾಲು ಸಾಲಾಗಿ ಸಾಗುವ ಎತ್ತರದ ಸ್ತಬ್ಧಚಿತ್ರಗಳು ಮತ್ತು ರಥಗಳಿಗೆ ರಸ್ತೆಯ ಮೇಲ್ಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗಳು ದೊಡ್ಡ ಅಡಚಣೆಯಾಗಿದ್ದವು. ಸುರಕ್ಷತೆಯ ದೃಷ್ಟಿಯಿಂದ ಮೆರವಣಿಗೆಯ ಸಮಯದಲ್ಲಿ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಿತ್ತು. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡ ಕುದ್ರೋಳಿ ಕ್ಷೇತ್ರದ ಆಡಳಿತ ಮಂಡಳಿಯವರು ಕರ್ನ...









