
ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತೀವ್ರವಾಗಿ ಖಂಡಿಸಿದ್ದಾರೆ.
ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ಸ್ಥಳವನ್ನು ಶುದ್ಧೀಕರಿಸಲಾಗಿದೆ ಎನ್ನಲಾದ ಕೃತ್ಯವನ್ನು ಪ್ರಶ್ನಿಸಿ, ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯದಂತಹ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ರಾಹುಲ್ ಗಾಂಧಿ ಅವರ ಮೇಲೆಯೇ ಪ್ರಕರಣ ದಾಖಲಿಸಿರುವುದು ವಿಪರ್ಯಾಸ ಎಂದು ಅವರು ಹೇಳಿದ್ದಾರೆ.
ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದಲಿತರು ಮತ್ತು ಆದಿವಾಸಿಗಳ ರಕ್ಷಣೆಗೆ ರೂಪಿಸಲಾಗಿದೆ. ಆದರೆ ದಲಿತರ ಪರವಾಗಿ ಧ್ವನಿ ಎತ್ತಿದವರ ವಿರುದ್ಧವೇ ಈ ಕಾಯ್ದೆಯನ್ನು ಬಳಸಿರುವುದು ಅದರ ಆಶಯಕ್ಕೆ ವಿರುದ್ಧವಾಗಿದೆ. ಇದು ಕಾನೂನಿನ ದುರುಪಯೋಗ ಹಾಗೂ ಸಂವಿಧಾನದ ಆಶಯಗಳಿಗೆ ಅಪಮಾನ ಎಂದು ರಘುಮೂರ್ತಿ ಆರೋಪಿಸಿದ್ದಾರೆ.

“ಒಬ್ಬ ದಲಿತ ನಾಯಕ ಭೇಟಿ ನೀಡಿದ ಸ್ಥಳವನ್ನು ಶುದ್ಧೀಕರಿಸುವ ಅಗತ್ಯ ಏಕೆ ಎದುರಾಯಿತು? ಇಂತಹ ಆಚರಣೆಗಳು ಜಾತಿ ಆಧಾರಿತ ಅಸಮಾನತೆಯ ಮನೋಭಾವ ಇನ್ನೂ ಸಮಾಜದಲ್ಲಿ ಜೀವಂತವಾಗಿರುವುದನ್ನು ತೋರಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ಕೂಡಲೇ ಹಿಂಪಡೆಯಬೇಕು. ಹಲ್ದ್ವಾನಿಯಲ್ಲಿ ನಡೆದಿದೆ ಎನ್ನಲಾದ ಶುದ್ಧೀಕರಣ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದಡಿ ಪ್ರತಿಯೊಬ್ಬರಿಗೂ ಸಮಾನತೆ ಹಾಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಸಾಮಾಜಿಕ ನ್ಯಾಯ ಮತ್ತು ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ಶುದ್ಧೀಕರಣ ಘಟನೆಗೂ ಬಿಜೆಪಿ ಅಥವಾ ಆರ್ಎಸ್ಎಸ್ಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕರು ಆರೋಪವನ್ನು ತಳ್ಳಿಹಾಕಿದ್ದಾರೆ.
