
ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಿರುಗಾಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.
ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಭಾರಿ ಮಳೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40–50 ಕಿ.ಮೀ ವೇಗದ ಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಉತ್ತರ ಕನ್ನಡದ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಬಾಗಲಕೋಟೆ, ಕೊಪ್ಪಳ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30–40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 40–50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಭಾರಿ ಮಳೆ ಬೀಳುವ ಮುನ್ಸೂಚನೆ ಇದೆ.
ಚಿತ್ರದುರ್ಗ, ಬಳ್ಳಾರಿ, ಹಾಸನ, ರಾಮನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಿರುಗಾಳಿ ಮತ್ತು ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಮರ, ವಿದ್ಯುತ್ ಕಂಬ ಹಾಗೂ ದುರ್ಬಲ ಕಟ್ಟಡಗಳ ಬಳಿ ನಿಲ್ಲದಂತೆ ಹಾಗೂ ರೈತರು ಕೃಷಿ ಚಟುವಟಿಕೆಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
