Sunday, September 20

ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

ಕೊಚ್ಚಿ: ಮಲಯಾಳಂ ನಟಿ ಮಂಜು ವಾರಿಯರ್ ಅವರ ವಿರುದ್ಧ ಮಾನಹಾನಿಕರ ಹಾಗೂ ಆಕ್ಷೇಪಾರ್ಹ ವಿಷಯಗಳನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ಸೇರಿದಂತೆ ಮೂವರಿಗೆ ಕೊಚ್ಚಿಯ ಮುನ್ಸಿಫ್ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ನಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೊಚ್ಚಿಯ ಮೂರನೇ ಹೆಚ್ಚುವರಿ ಮುನ್ಸಿಫ್ ನ್ಯಾಯಾಲಯದ ನ್ಯಾಯಾಧೀಶೆ ರೀಜಾ ಆರ್. ನಾಯರ್, ಸನಲ್ ಕುಮಾರ್ ಶಶಿಧರನ್, ಆನ್‌ಲೈನ್ ನ್ಯೂಸ್ ಪೋರ್ಟಲ್ ನಡೆಸುತ್ತಿರುವ ಶಾಜನ್ ಸ್ಕರಿಯಾ ಹಾಗೂ ಮೆಟಾ ಪ್ಲಾಟ್‌ಫಾರ್ಮ್ಸ್‌ಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಪ್ರಕರಣದ ವಿಚಾರಣೆ ಮುಂದುವರಿದಿರುವ ಸಂದರ್ಭದಲ್ಲಿ ಮಂಜು ವಾರಿಯರ್ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವಿಷಯ ಪ್ರಕಟಿಸದಂತೆ ಸನಲ್ ಕುಮಾರ್ ಶಶಿಧರನ್ ಅವರಿಗೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನಟಿಯ ಪರ ವಕೀಲೆ ಶಾಂತಿ ಎಂ. ಅವರ ಪ್ರಕಾರ, ಸನಲ್ ಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಮಂಜು ವಾರಿಯರ್ ವಿರುದ್ಧ ನಿರಂತರವಾಗಿ ಸುಳ್ಳು ಹಾಗೂ ಮಾನಹಾನಿಕರ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಇಂತಹ ವಿಷಯಗಳ ಪ್ರಸಾರ ತಡೆಯುವಂತೆ ಕೋರಿ ನ್ಯಾಯಾಲಯದ ಮೊರೆ ಹೋಗಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ನಟಿಯ ತೇಜೋವಧೆ ಮಾಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಲಾಗಿರುವ ನಿಂದನೀಯ ಮತ್ತು ಸುಳ್ಳು ವಿಷಯಗಳನ್ನು ತಕ್ಷಣ ತೆಗೆದುಹಾಕುವಂತೆ ಮೆಟಾ ಪ್ಲಾಟ್‌ಫಾರ್ಮ್ಸ್‌ಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ.

ಸಿವಿಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 26ರ ಅಡಿಯಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಲಾಗಿದೆ.