Friday, September 18

ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಸಚಿವೆ ಹಾಗೂ ಅವರ ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದೆ.

ಸಿಎಲ್ ಪಿ ಸಭೆ ಮುಗಿಸಿ ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕಾರಿನಲ್ಲಿ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ಅಂಬಡಗಟ್ಟಿ ಗ್ರಾಮದ ಬಳಿ ಅವರಿದ್ದ ಕಾರಿಗೆ ನಾಯಿ ಅಡ್ಡಬಂದಿದೆ. ಅದನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಂಭವಿಸಿದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗಾಯಗೊಂಡಿದ್ದು, ಅವರು ಬೆಳಗಾವಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.