Tuesday, June 24

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ’ ಎಂದವರು ಹೇಳಿದ್ದಾರೆ.

‘ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ’ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘Calling a Spade, a Spade’ ಎಂಬುದಕ್ಕೆ ಪಕ್ಷವು ನನಗೆ ಬಹುಮಾನ ನೀಡಿದೆ ಎಂದವರು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ.

‘ಸತ್ಯವಂತರಿಗಿದು ಕಾಲವಲ್ಲ
ದುಷ್ಟಜನರಿಗೆ ಸುಭಿಕ್ಷಕಾಲ ||
ಉಪಕಾರ ಮಾಡಿದರೆ ಅಪಕರಿಸುವ ಕಾಲ
ಸಕಲವು ತಿಳಿದವಗೆ ದುರ್ಭಿಕ್ಷ ಕಾಲ.
ಧರ್ಮ ಮಾಡಲು ನಿರ್ಮೂಲವಾಗುವ ಕಾಲ
ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ
ಸತ್ಯವಂತರಿಗಿದು ಕಾಲವಲ್ಲ’  
ಎಂದು ಯತ್ನಾಳ್ ಹೇಳಿಕೊಂಡಿದ್ದಾರೆ.

‘ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ ಎಂದಿರುವ ಯತ್ನಾಳ್, ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ತಡೆಯುವುದಿಲ್ಲ. ನಾನು ಅದೇ ಹುರುಪು ಮತ್ತು ದೃಢತೆಯಿಂದ ನನ್ನ ಜನರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ’ ಎಂದು ಯತ್ನಾಳ್ ಅವರು ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಬಗ್ಗೆ ನೀಡಿರುವ ಮೊದಲ ಪ್ರತಿಕ್ರಿಯೆಯಲ್ಲಿ ಹೇಳಿಕೊಂಡಿದ್ದಾರೆ.

ಎಲ್ಲಾ ಕಾರ್ಯಕರ್ತರು, ಹಿತೈಷಿಗಳು, ಸ್ನೇಹಿತರು, ಪರಿಚಯಸ್ಥರು, ಸ್ವಾಮೀಜಿಗಳು, ಮಾಧ್ಯಮಗಳು, ಬೆಂಬಲದ ಆಧಾರ ಸ್ತಂಭವಾಗಿರುವ ನನ್ನ ಕುಟುಂಬ ಮತ್ತು ಸರ್ವಶಕ್ತರಿಗೆ ನಾನು ಧನ್ಯವಾದಗಳು ಎಂದು ಸಾಮಾಜಿಕ ಮಾಧ್ಯಮದಲ್ಲಿ ಯತ್ನಾಳ್ ಬರೆದುಕೊಂಡಿದ್ದಾರೆ.