
ತುಮಕೂರು: ಆಂಧ್ರ ಪ್ರದೇಶದಲ್ಲಿ ಕೋವಿಡ್ ಸೋಂಕು ಮತ್ತು ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದೆ. ಪಾವಗಡ-ಆಂಧ್ರ ಸಂಪರ್ಕಿಸುವ ಎಂಟು ಗಡಿ ಮಾರ್ಗಗಳಲ್ಲಿ ಆರೋಗ್ಯ ಇಲಾಖೆ ಕೋವಿಡ್ ತಪಾಸಣೆ ಆರಂಭಿಸಿದ್ದು, ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮಾತನಾಡಿ, ನೆರೆಯ ಅನಂತಪುರ ಜಿಲ್ಲೆಯಲ್ಲಿ ಕೋವಿಡ್ನಿಂದ ಸಾವಿನ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು. ಗಡಿ ಮೂಲಕ ಬರುವವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಸೋಂಕಿನ ಲಕ್ಷಣ ಕಂಡುಬಂದರೆ ತಕ್ಷಣ ಐಸೋಲೇಟ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ತುಮಕೂರು ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ಪ್ರಕರಣಗಳೂ ವರದಿಯಾಗಿರುವ ಹಿನ್ನೆಲೆಯಲ್ಲಿ ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಹಲವು ವರ್ಷಗಳಿಂದ ಸ್ವಚ್ಛಗೊಳಿಸದ ನೀರಿನ ಟ್ಯಾಂಕ್ಗಳನ್ನು ತಕ್ಷಣ ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಪಾವಗಡದ ನಾಗಲಮಡಿಕೆ, ಕೊಡಮಡುಗು, ವಳ್ಳೂರಿ ಸೇರಿದಂತೆ ಎಂಟು ಚೆಕ್ಪೋಸ್ಟ್ಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮೂಲಕ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿ ಪ್ರಯಾಣಿಕರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ.
ಕಳೆದ ಎರಡು ದಿನಗಳಿಂದ ಗಡಿಯಲ್ಲಿ ನಿರಂತರ ನಿಗಾ ವಹಿಸಲಾಗಿದ್ದು, ಇದುವರೆಗೆ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಪಾವಗಡ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಅಗತ್ಯ ಬೆಡ್ ಹಾಗೂ ಆಮ್ಲಜನಕ ವ್ಯವಸ್ಥೆಯನ್ನೂ ಸಿದ್ಧಗೊಳಿಸಲಾಗಿದೆ. ಸಾರ್ವಜನಿಕರು ಆತಂಕಪಡುವ ಬದಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.
