Wednesday, August 5

ಎಕ್ಸ್‌ಪ್ರೆಸ್‌ವೇನಲ್ಲಿ ಧಗಧಗಿಸಿದ ಕಾರು; ಒಂದೇ ಕುಟುಂಬದ ಐವರು ಸಜೀವ ದಹನ

ಜೈಪುರ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತ ದೇಶವನ್ನೇ ಬೆಚ್ಚಿಬೀಳಿಸಿದೆ. ಅಲ್ವಾರ್ ಜಿಲ್ಲೆಯ ಲಕ್ಷ್ಮಣ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮೌಜ್‌ಪುರ ಬಳಿ ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿದ್ದಾರೆ.

ಮೃತರನ್ನು ಶಿಯೋಪುರ ಮೂಲದವರು ಎಂದು ಗುರುತಿಸಲಾಗಿದ್ದು, ಇವರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಹಾಗೂ ಒಂದು ಮಗು ಸೇರಿದ್ದಾರೆ. ಕೋಟಾ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಬೆಳಗಿನ ಜಾವ ಸುಮಾರು 1 ಗಂಟೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣ ವಾಹನ ಬೆಂಕಿಗಾಹುತಿಯಾಗಿದೆ.

ಅಪಘಾತದ ವೇಳೆ ಚಾಲಕ ವಿನೋದ್ ಕುಮಾರ್ ಮೆಹರ್ ವಾಹನದಿಂದ ಹೊರಕ್ಕೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದರೂ, ಶೇ.80ರಷ್ಟು ಸುಟ್ಟ ಗಾಯಗಳಾಗಿರುವುದರಿಂದ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ತನಿಖೆ ಕೈಗೊಂಡಿದ್ದಾರೆ.